ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ಅವರ ಆಯ್ಕೆಯನ್ನು ಅಸಿಂಧು ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಹಿನ್ನೆಲೆಯಲ್ಲಿ ನಾಲ್ಕು ವಾರಗಳೊಳಗೆ ಮತ ಎಣಿಕೆಯನ್ನು ಮರು ನಡೆಸಿ, ಅದರ ಆಧಾರದ ಮೇಲೆ ಫಲಿತಾಂಶವನ್ನು ಪ್ರಕಟಿಸುವಂತೆ ನ್ಯಾಯಾಲಯ ಸೂಚಿಸಿದೆ. ಈ ತೀರ್ಪಿನಿಂದ ಕ್ಷೇತ್ರದ ರಾಜಕೀಯದಲ್ಲಿ ಹೊಸ ತಿರುವು ಎದುರಾಗುವ ಸಾಧ್ಯತೆಗಳಿವೆ.
ಅರ್ಜಿದಾರರ ಕೋರಿಕೆಯಂತೆ ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲು ಹೈಕೋರ್ಟ್ ತಾನೇ ನೀಡಿದ್ದ ತೀರ್ಪಿಗೆ 30 ದಿನಗಳ ಕಾಲ ತಡೆಯಾಜ್ಞೆ ನೀಡಿದೆ.
ಅಭ್ಯರ್ಥಿಗಳು ಪಡೆದಿದ್ದ ಮತಗಳ ವಿವರ
ಕೆ.ವೈ, ನಂಜೇಗೌಡ ( ಕಾಂಗ್ರೆಸ್)- 50,955
ಮಂಜುನಾಥ್ ಗೌಡ( ಬಿಜೆಪಿ)- 50707
ಹೂಡಿ ವಿಜಯ್ ಕುಮಾರ್( ಪಕ್ಷೇತರ)- 49362
ಜಿ,ಇ ರಾಮೇಗೌಡ( ಜೆಡಿಎಸ್)- 17.627
ಗೆಲುವಿನ ಅಂತರ 248.
ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಬೇಕು ಎಂದು ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ಪರ ವಕೀಲರಾದ ನಳೀನ ಮಾಯಾಗೌಡ ನ್ಯಾಯಾಲಯದಲ್ಲಿ ಮನವಿ ಮಾಡಿದರು. ತೀರ್ಪಿನ ಜಾರಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿದ ಈ ಮನವಿಯನ್ನು ನ್ಯಾಯಮೂರ್ತಿಗಳು ಮಾನ್ಯಗೊಳಿಸಿದರು.
ಇದಕ್ಕೂ ಮುನ್ನ ನಂಜೇಗೌಡರ ಆಯ್ಕೆಯನ್ನು ಪ್ರಶ್ನಿಸಿ ಪರಾಜಿತ ಬಿಜೆಪಿ ಅಭ್ಯರ್ಥಿ ಕೆ.ಎಸ್. ಮಂಜುನಾಥಗೌಡ ಹೈಕೋರ್ಟ್ ಮೆಟ್ಟಿಲೇರಿದ್ದರು. ಮತ ಎಣಿಕೆಯಲ್ಲಿ ತಾಂತ್ರಿಕ ಲೋಪಗಳು ನಡೆದಿವೆ ಎಂದು ಆರೋಪಿಸಿದ ಅವರು ಮರು ಎಣಿಕೆ ನಡೆಸಿ ಫಲಿತಾಂಶ ಪ್ರಕಟಿಸಬೇಕೆಂದು ಅರ್ಜಿ ಸಲ್ಲಿಸಿದ್ದರು. ಈ ಕುರಿತು ಸುದೀರ್ಘ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠದ ನ್ಯಾಯಮೂರ್ತಿ ಆರ್. ದೇವದಾಸ್ ಅವರು ಮಂಗಳವಾರ ತೀರ್ಪು ಪ್ರಕಟಿಸಿದರು.
ಹೈಕೋರ್ಟ್ ಮಾಲೂರು ವಿಧಾನಸಭಾ ಕ್ಷೇತ್ರದ 2023ರ ಚುನಾವಣೆಗೆ ಸಂಬಂಧಿಸಿದಂತೆ ಮರು ಮತ ಎಣಿಕೆ ನಡೆಸುವಂತೆ ಆದೇಶಿಸಿದೆ. ನಾಲ್ಕು ವಾರಗಳ ಒಳಗಾಗಿ ಪ್ರಕ್ರಿಯೆ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ. ಮತ ಎಣಿಕೆಯ ವಿಡಿಯೋವನ್ನು ಜಿಲ್ಲಾ ಚುನಾವಣಾಧಿಕಾರಿ ಸಲ್ಲಿಸದ ಕಾರಣ, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ನ್ಯಾಯಾಲಯ ತಿಳಿಸಿದೆ. ಈ ಕುರಿತು ಬಿಜೆಪಿ ಅಭ್ಯರ್ಥಿ ಮಂಜುನಾಥ್ ಗೌಡ ಹೈಕೋರ್ಟ್ ಮೊರೆ ಹೋಗಿದ್ದರು.
ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ವೈ. ನಂಜೇಗೌಡ ಅವರು ಗೆದ್ದಿದ್ದರು. ಆದರೆ ಮತ ಎಣಿಕೆ ಕಾನೂನುಬದ್ಧವಾಗಿಲ್ಲವೆಂದು ಆರೋಪಿಸಿ ಮಂಜುನಾಥ್ ಗೌಡ ಅವರು ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಇದನ್ನು ವಿಚಾರಣೆ ನಡೆಸಿದ ಹೈಕೋರ್ಟ್, ನಂಜೇಗೌಡರ ಆಯ್ಕೆಯನ್ನು ಪ್ರಶ್ನಿಸುವ ಮನವಿಗೆ ಪ್ರತಿವಾದಿಗಳಿಗೆ ಹ್ಯಾಂಡ್ ಸಮನ್ಸ್ ನೀಡಲು ಅನುಮತಿ ನೀಡಿತ್ತು.
ವಿಚಾರಣೆಯಲ್ಲಿ ಕೇಂದ್ರ ಚುನಾವಣಾ ಆಯೋಗದ ಪರ ವಕೀಲ ಶರತ್ ಆರ್. ದೊಡವಾಡ ಅವರು ಹಾಜರಾಗಿ, ಮತ ಎಣಿಕೆ ಸಮಯದಲ್ಲಿ ಇವಿಎಂ ಹಾಗೂ ವಿ.ವಿ.ಪ್ಯಾಟ್ ಪೇಪರ್ ಟ್ರಯಲ್ ಹೊಂದಾಣಿಕೆ ಪ್ರಕ್ರಿಯೆಯನ್ನು ವಿಡಿಯೋಗೆತ್ತಲಾಗಿದ್ದು, ಅದರ ದೃಶ್ಯಾವಳಿಗಳನ್ನು ಒಳಗೊಂಡ ಸಿಡಿ ಈಗಾಗಲೇ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.
ನ್ಯಾಯಾಲಯದ ಆದೇಶದ ಮೇರೆಗೆ ಇವಿಎಂಗಳನ್ನು ಇರಿಸಿದ್ದ ಸ್ಟ್ರಾಂಗ್ರೂಂ ತೆರೆಯಲಾಗಿದ್ದು, ಅಲ್ಲಿ ವಿ.ವಿ.ಪ್ಯಾಟ್ ಮತ್ತು ಇವಿಎಂ ಹೊಂದಾಣಿಕೆ ಚಿತ್ರೀಕರಣದ ಮೂರು ಸಿಡಿಗಳು ದೊರೆತಿವೆ. ಜೊತೆಗೆ ಮತ ಎಣಿಕೆಯಲ್ಲಿ ಅಭ್ಯರ್ಥಿಗಳ ಏಜೆಂಟರಿಗೆ ನೀಡಿದ್ದ ಫಾರಂ ನಂ.17(ಸಿ) ನ ಪ್ರತಿಯೂ ಲಭ್ಯವಾಗಿದೆ. ಇವುಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಹೆಚ್ಚಿನ ಸಮಯ ನೀಡಬೇಕೆಂದು ಅವರು ಮನವಿ ಮಾಡಿದರು.
ಅರ್ಜಿದಾರ ಪರ ಹಿರಿಯ ವಕೀಲರು, ಈ ಅರ್ಜಿಯಲ್ಲಿ ಶಾಸಕ ಕೆ.ವೈ. ನಂಜೇಗೌಡ ಹಾಗೂ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಇತರೆ 13 ಮಂದಿ ಪ್ರತಿವಾದಿಗಳಿದ್ದಾರೆ. ಇವರಲ್ಲಿ ಹಲವರಿಗೆ ಹೈಕೋರ್ಟ್ನ ನೋಟಿಸ್ ಅಥವಾ ಸಮನ್ಸ್ ಇನ್ನೂ ತಲುಪಿಲ್ಲ. ಆದ್ದರಿಂದ ಪ್ರತಿವಾದಿಗಳಿಗೆ ಹ್ಯಾಂಡ್ಸಮನ್ಸ್ ಮೂಲಕ ನೋಟಿಸ್ ನೀಡಲು ಅವಕಾಶ ನೀಡಬೇಕು ಎಂದು ಮನವಿ ಸಲ್ಲಿಸಿದರು.
ವಿಧಾನಸಭೆ ಚುನಾವಣೆಯಲ್ಲಿ ಮಾಲೂರು ಕ್ಷೇತ್ರದಿಂದ ಕಾಂಗ್ರೆಸ್ನಿಂದ ಸ್ಪರ್ಧಿಸಿದ್ದ ಕೆ ವೈ ನಂಜೇಗೌಡ ಗೆಲುವು ಸಾಧಿಸಿದ್ದರು. ಇದನ್ನು ಪ್ರಶ್ನಿಸಿರುವ ಅರ್ಜಿದಾರರು, ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಎಲ್ಲಾ 15 ಮಂದಿ ಸ್ಪರ್ಧಿಗಳ ಏಜೆಂಟ್ಗಳಿಗೆ ಮತ ಎಣಿಕೆ ಕೇಂದ್ರದಲ್ಲಿ ಸಮರ್ಪಕ ವ್ಯವಸ್ಥೆ ಮಾಡಿರಲಿಲ್ಲ. ಒಂದೇ ಕೊಠಡಿಯಲ್ಲಿ ಮತಗಳ ಎಣಿಕೆ ಕಾರ್ಯ ನಡೆಯಬೇಕಿದ್ದು, ಎರಡು ಪ್ರತ್ಯೇಕ ಕೊಠಡಿಯಲ್ಲಿ ಮತ ಎಣಿಕೆ ಮಾಡಲಾಗಿದೆ. ಆ ಮೂಲಕ ಜನಪ್ರತಿನಿಧಿಗಳ ಕಾಯಿದೆಯ ನಿಯಮಗಳು ಮತ್ತು ಚುನಾವಣಾ ಆಯೋಗ ಪ್ರಕಟಿಸಿದ್ದ ನಿಯಮಗಳನ್ನು ಉಲ್ಲಂಘಿಸಲಾಗಿದೆ. ಆದ್ದರಿಂದ, ನಂಜೇಗೌಡ ಅವರನ್ನು ವಿಜೇತ ಅಭ್ಯರ್ಥಿಯಾಗಿ ಘೋಷಣೆ ಮಾಡಿದ ಚುನಾವಣಾ ಆಯೋಗದ ಕ್ರಮ ರದ್ದುಪಡಿಸಬೇಕು. ಮತಗಳ ಮರು ಎಣಿಕೆಗೆ ನಿರ್ದೇಶಿಸಬೇಕು ಎಂದು ಕೋರಿದ್ದರು.
ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್ ಅಗತ್ಯ ದಾಖಲಾತಿ ನೀಡುವಂತೆ ಕೇಳಿತ್ತು. ಜಿಲ್ಲಾಧಿಕಾರಿಗಳು ಸ್ಟ್ರಾಂಗ್ ರೂಮ್ನಲ್ಲಿದ್ದ ದಾಖಲೆಗಳನ್ನು ನ್ಯಾಯಾಲಯಕ್ಕೆ ನೀಡಿದ್ದರು. ಕಳೆದ 2 ವರ್ಷದಿಂದ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆ ನಡೆದಿತ್ತು.






