ಬೆಂಗಳೂರು ವೈಟ್ಫೀಲ್ಡ್ ಪ್ರದೇಶದಲ್ಲಿ ಆರು ವರ್ಷದ ಪುಟ್ಟ ಬಾಲಕಿಯನ್ನು ಕತ್ತು ಹಿಸುಕಿ ಕೊಲ್ಲಲಾದ ಘಟನೆ ತೀವ್ರ ಆಘಾತ ಮೂಡಿಸಿದೆ. ತಾಯಿಯ ಮೇಲಿನ ದ್ವೇಷದಿಂದಾಗಿ ಆರೋಪಿಯು ನಿರಪರಾಧ ಮಗುವಿನ ಪ್ರಾಣ ಕಿತ್ತುಕೊಂಡು, ನಂತರ ಶವವನ್ನು ಚರಂಡಿಗೆ ಎಸೆದಿದ್ದಾನೆ. ಪ್ರಕರಣದ ತನಿಖೆ ಮುಂದುವರಿದಂತೆ, ಕೊಲೆಗೂ ಮುನ್ನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಇದನ್ನು ಓದಿ: ವಿಚ್ಛೇದನ ಪ್ರಕರಣದಲ್ಲಿ ಕ್ಲೈಂಟ್ ಜೊತೆ ರೋಮ್ಯಾಂಟಿಕ್ ಸಂಬಂಧ: ಮಹಿಳಾ ವಕೀಲೆಗೆ ಸುಪ್ರೀಂಕೋರ್ಟ್ ತೀವ್ರ ಆಕ್ಷೇಪ
ಈ ಪ್ರಕರಣಕ್ಕೆ ಸಂಬಂಧಿಸಿ ಯುಸೂಫ್ ಮೀರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಯ ತಾಯಿಯೊಂದಿಗೆ ಜಗಳ ಮಾಡಿಕೊಂಡಿದ್ದ ಆರೋಪಿಯು ಮಗುವನ್ನು ಅಪಹರಿಸಿದ್ದಾನೆ ಎಂದು ತಿಳಿದುಬಂದಿದೆ. ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಬಳಿಕ ಪ್ಲಾಸ್ಟಿಕ್ ವೈರ್ ಬಳಸಿ ಕುತ್ತಿಗೆ ಬಿಗಿದು ಹತ್ಯೆ ಮಾಡಿದ್ದಾನೆ. ನಂತರ ಮೃತದೇಹವನ್ನು ಪ್ಲಾಸ್ಟಿಕ್ ಚೀಲದಲ್ಲಿ ಹಾಕಿ ರಸ್ತೆ ಬದಿಯ ಚರಂಡಿಗೆ ಎಸೆದಿರುವುದು ತನಿಖೆಯಲ್ಲಿ ದೃಢಪಟ್ಟಿದೆ.
ಬಾಲಕಿ ನಾಪತ್ತೆಯಾದ ಒಂದು ದಿನದ ನಂತರ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು ದಾಖಲಾಗಿದ ಹನ್ನೆರಡು ಗಂಟೆಗಳೊಳಗೆ ರಸ್ತೆ ಬದಿಯ ಚರಂಡಿಯಲ್ಲಿ ಪ್ಲಾಸ್ಟಿಕ್ ಚೀಲದೊಳಗೆ ಮೃತದೇಹ ಪತ್ತೆಯಾಗಿದೆ. ಶವ ಕೊಳೆತ ಸ್ಥಿತಿಯಲ್ಲಿ ಕಂಡುಬಂದ ಕಾರಣ ಆರಂಭದಲ್ಲಿ ಕೊಲೆ ಮಾತ್ರ ನಡೆದಿದೆ ಎಂಬ ಶಂಕೆ ಇತ್ತು. ಆದರೆ ವೈದ್ಯಕೀಯ ಪರೀಕ್ಷೆ ಮತ್ತು ತನಿಖೆಯ ಬಳಿಕ ಅತ್ಯಾಚಾರ ಬಳಿಕ ಕೊಲೆ ನಡೆದಿರುವುದು ಸ್ಪಷ್ಟವಾಗಿದೆ.
ಪೊಲೀಸ್ ತನಿಖೆಯಲ್ಲಿ ಆರೋಪಿಯ ಹಿನ್ನೆಲೆ ಪರಿಶೀಲಿಸಿದಾಗ, ಯುಸೂಫ್ ಮೀರ್ ವಿರುದ್ಧ ಈಗಾಗಲೇ ಎರಡು ಗಂಭೀರ ಪ್ರಕರಣಗಳು ದಾಖಲಾಗಿರುವುದು ಪತ್ತೆಯಾಗಿದೆ. ಪಶ್ಚಿಮ ಬಂಗಾಳದಲ್ಲಿ ಒಂದು ಪೋಕ್ಸೋ ಪ್ರಕರಣ ಹಾಗೂ ಮಹಿಳೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಇದ್ದವು ಎಂಬುದು ಗೊತ್ತಾಗಿದೆ.
ಸದ್ಯ ಆರೋಪಿಯನ್ನು ಪಶ್ಚಿಮ ಬಂಗಾಳದಿಂದ ಬಂಧಿಸಿ ಕರೆತಂದು ವಿಚಾರಣೆ ನಡೆಸಲಾಗುತ್ತಿದ್ದು, ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸುವ ಮನಸ್ಥಿತಿಯ ವ್ಯಕ್ತಿ ಎನ್ನುವುದು ತನಿಖೆಯಲ್ಲಿ ತಿಳಿದುಬಂದಿದೆ. ಪೊಲೀಸರು ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.






