ರಾಜ್ಯದಲ್ಲಿ ಸಾಮಾಜಿಕ ಹಾಗೂ ಆರ್ಥಿಕ ಸಮೀಕ್ಷೆ ನಡೆಯುತ್ತಿದ್ದು,ಈ ನಡುವೆ ಸಿಎಂ ಸಿದ್ದರಾಮಯ್ಯ ಅವರು ದಸರಾ ರಜೆಯನ್ನು ಅ.18ರ ವರೆಗೆ ವಿಸ್ತರಣೆ ಮಾಡುವ ಬಗ್ಗೆ ಮಾಹಿತಿ ನೀಡಿದ್ದಾರೆ. ಅಕ್ಟೋಬರ್ 18 ರವರೆಗೆ ರಾಜ್ಯದ ಎಲ್ಲಾ ಶಾಲೆಗಳಿಗೆ ದಸರಾ ರಜೆ ವಿಸ್ತರಣೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ರಜೆ ವಿಸ್ತರಣೆಯನ್ನು ಸರ್ಕಾರಿ ಶಾಲೆ ಹಾಗೂ ಅನುದಾನಿತ ಶಾಲೆಗಳಿಗೆ ವಿಸ್ತರಣೆ ಮಾಡಲಾಗಿದೆ. ಈ ಬಗ್ಗೆ ಸುದ್ದಿಗಾರರ ಜೊತೆಗೆ ಮಾತನಾಡಿದ ಸಿಎಂ, ಹಲವು ಕಡೆ ಸಮೀಕ್ಷೆ ಪೂರ್ಣವಾಗಿಲ್ಲ. ಶಿಕ್ಷಕರನ್ನು ಸಂಪೂರ್ಣವಾಗಿ ಸಮೀಕ್ಷೆಗೆ ಬಳಸಿಕೊಳ್ಳಲು ನಿರ್ಧಾರ ಮಾಡಲಾಗಿದೆ ಎಂದಿದ್ದಾರೆ.
ಸೆಪ್ಟೆಂಬರ್ 2 ರಿಂದ ರಾಜ್ಯದ ಜನರ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸಮೀಕ್ಷೆ ಶುರುವಾಗಿದೆ. ಸಮೀಕ್ಷೆ ಇವತ್ತು ಮುಗಿಯಬೇಕಿತ್ತು. ಕೆಲವು ಜಿಲ್ಲೆಗಳಲ್ಲಿ ಪೂರ್ತಿ ಆಗಿಲ್ಲ. ಕೊಪ್ಪಳ ಶೇ 97 ಆಗಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ 67 ರಷ್ಟು ಆಗಿದೆ. ಹೀಗೆ ವ್ಯತ್ಯಾಸಗಳಿವೆ. ಹೀಗಾಗಿ ಶಿಕ್ಷಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಆಯೋಗ ಚರ್ಚಿಸಿದ್ದಾರೆ. 1 ಲಕ್ಷ 20 ಸಾವಿರ ಶಿಕ್ಷಕರು ಸೇರಿ ಒಂದು ಲಕ್ಷ ಅರವತ್ತು ಸಾವಿರ ಸಿಬ್ಬಂದಿ ಸಮೀಕ್ಷೆಯಲ್ಲಿ ತೊಡಗಿದ್ದಾರೆ.
ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಮತ್ತು ಶಿಕ್ಷಕರ ಸಂಘ ಹೆಚ್ಚುವರಿಯಾಗಿ 10 ದಿನಗಳ ಕಾಲಾವಕಾಶ ಕೇಳಿ ಮನವಿ ಮಾಡಿದ್ದಾರೆ. ಈ ಮನವಿ ಪುರಸ್ಕರಿಸಿ ಅಕ್ಟೋಬರ್ 18ರ ವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ ಘೋಷಿಸಿದ್ದೇವೆ. 8 ವರ್ಕಿಂಗ್ ಡೇಸ್ ರಜೆ ಘೋಷಿಸಲಾಗಿದೆ. ಇದೇ 12ನೇ ತಾರೀಕಿನಿಂದ ದ್ವಿತೀಯ ಪಿಯು ಮಧ್ಯಂತರ ಪರೀಕ್ಷೆ ನಡೆಯುತ್ತಿರುವುದರಿಂದ ಸಮೀಕ್ಷೆ ಕಾರ್ಯದಿಂದ ಪಿಯುಸಿ ಉಪನ್ಯಾಸಕರಿಗೆ ವಿನಾಯ್ತಿ ನೀಡಲಾಗಿದೆ ಎಂದರು.
ಬೆಂಗಳೂರು ನಗರದಲ್ಲಿ 6,700 ಜನ ಶಿಕ್ಷಕರು ಸಮೀಕ್ಷೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ 46 ಲಕ್ಷ ಮನೆಗಳಿವೆ. ದಿನಕ್ಕೆ 10-15 ಮನೆಗಳ ಸಮೀಕ್ಷೆ ನಡೆಸುವ ಗುರಿ ನೀಡಲಾಗಿದೆ. ಬೆಂಗಳೂರಿನಲ್ಲಿ ನರಕ ಚತುರ್ದಷಿ ಒಳಗೆ ಸಮೀಕ್ಷೆ ಮುಗಿಸಲು ಸೂಚಿಸಲಾಗಿದೆ. ಶಿಕ್ಷಕರು ಕೂಡ ಇಷ್ಟರೊಳಗೆ ಸಮೀಕ್ಷೆ ಮುಗಿಸುವ ಭರವಸೆ ನೀಡಿದ್ದಾರೆ.
ಸಮೀಕ್ಷೆ ನಡೆಯುವಾಗ ಮೂವರು ಶಿಕ್ಷಕರು ಮೃತಪಟ್ಟಿದ್ದಾರೆ. ಇವರಿಗೆ ತಲಾ 20 ಲಕ್ಷ ಪರಿಹಾರ ನೀಡಲಾಗುವುದು ಎಂದರು. ಸಮೀಕ್ಷೆಯಲ್ಲಿ ತೊಡಗಿಸಿಕೊಳ್ಳಲು ಒಪ್ಪದ, ಹಿಂದೇಟು ಹಾಕುವವರ ವಿರುದ್ಧ ಸರ್ಕಾರ ಶಿಸ್ತಿನ ಕ್ರಮ ಕೈಗೊಳ್ಳಲಿದೆ. GBA ಏರಿಯಾದಲ್ಲಿ ತಡವಾಗಿ ಸಮೀಕ್ಷೆ ಶುರುವಾಗಿದೆ. ಚುನಾವಣಾ ಆಯೋಗದ ಕೆಲಸ ಮತ್ತು ಇತರೆ ತರಬೇತಿ ಇದ್ದಿದ್ದರಿಂದ ತಡವಾಗಿ ಶುರುವಾಗಿದೆ. ಆದ್ದರಿಂದ GBA ಏರಿಯಾದಲ್ಲಿ ಸಮೀಕ್ಷೆ ಪ್ರಮಾಣ ಕಡಿಮೆ ಇದೆ ಎಂದರು.






